ಬೆಂಗಳೂರು: ಎಲ್ಲಾ ಸಮಾಜದ ಮುಂದಿನ ಪೀಳಿಗೆಗೆ ನ್ಯಾಯ ಒದಗಿಸಲು ಹಿಂದುಳಿದ ವರ್ಗಗಳ ಆಯೋಗದಿಂದ ನಡೆಸಲಾಗುತ್ತಿರುವ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯಲ್ಲಿ ಭಾಗವಹಿಸಿ ಅಗತ್ಯ ಮಾಹಿತಿಗಳನ್ನು ನೀಡಬೇಕು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸಾರ್ವಜನಕರಿಗೆ ಮನವಿ ಮಾಡಿದರು.
ಜಿಬಿಎ ವ್ಯಾಪ್ತಿಯಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿ ಸಮೀಕ್ಷೆಗೆ ಚಾಲನೆ ನೀಡಿದ ನಂತರ ಸದಾಶಿವನಗರ ನಿವಾಸದ ಬಳಿ ಇಂದು (ಶನಿವಾರ ಅ. 04) ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯಲ್ಲಿ ಇಂದಿನಿಂದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಆರಂಭವಾಗುತ್ತಿದ್ದು, ನನ್ನ ಮನೆಯಲ್ಲೂ ಸಮೀಕ್ಷೆ ನಡೆಸಿದ್ದಾರೆ. ನಾನು ಎಲ್ಲಾ ಮಾಹಿತಿ ನೀಡಿದ್ದೇನೆ. ಸಾರ್ವಜನಿಕರು ಕೂಡ ತಾಳ್ಮೆಯಿಂದ ನಿಮ್ಮ ಮಾಹಿತಿ ಒದಗಿಸಿಕೊಡಬೇಕು. ಈ ಸಮೀಕ್ಷೆಗೆ ಎಲ್ಲಾ ಜಾತಿ ಸಮುದಾಯದವರು ಸಹಕಾರ ನೀಡಬೇಕು ಎಂದು ಮನವಿ ಮಾಡುತ್ತೇನೆ ಎಂದರು.
ಕೆಲವು ವೈಯಕ್ತಿಕ ಮಾಹಿತಿ ಪ್ರಶ್ನೆಗಳಿವೆ ಈ ಪ್ರಶ್ನೆಗಳಿಗೆ ಉತ್ತರ ನೀಡಲು ಬಲವಂತ ಮಾಡುವಂತಿಲ್ಲ ಎಂದು ನ್ಯಾಯಾಲಯ ಹೇಳಿದೆ. ಸಮೀಕ್ಷೆದಾರರು ಈ ಪ್ರಶ್ನೆಗಳನ್ನು ಕೇಳುತ್ತಾರೆ. ಉತ್ತರ ನೀಡುವುದು ಜನರಿಗೆ ಬಿಟ್ಟ ವಿಚಾರ. ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು. ಬೆಂಗಳೂರು ನಗರದಲ್ಲಿ ಸಮೀಕ್ಷೆ ಮಾಡುವಾಗ ಸೂಕ್ಷ್ಮತೆಯಿಂದ ಮಾಡಬೇಕು ಎಂದು ಸಮೀಕ್ಷೆದಾರರಿಗೂ ಹೇಳಿದ್ದೇನೆ. ಎಂದರು. ಇದನ್ನೂ ಓದಿ: ಸಿನಿಮಾ ನೋಡಲು ಇಡೀ ಥಿಯೇಟರ್ ಬುಕ್ ಮಾಡಿದ ಮಾಜಿ ಸಂಸದ!
ಅನೇಕರು ಸಮೀಕ್ಷೆಯಲ್ಲಿ ಭಾಗವಹಿಸಲು ನಿರಾಕರಿಸುತ್ತಿದ್ದಾರೆ ಅವರಿಗೆ ತಿಳುವಳಿಕೆ ನೀಡಬೇಕಾದದ್ದು ನಮ್ಮ ಕರ್ತವ್ಯ. ನಾವದನ್ನು ಮಾಡುತ್ತೇವೆ ಎಂದರು
ಸರ್ವರ್ ಸಮಸ್ಯೆ ಇದೆ ಅದನ್ನೆಲ್ಲಾ ಅವರು ಸರಿಪಡಿಸುತ್ತಾರೆ. ಅದು ಅವರ ಜವಾಬ್ದಾರಿ. ಆನ್ ಲೈನ್ ನಲ್ಲಿ ಕೂಡ ಸಮೀಕ್ಷೆಯಲ್ಲಿ ಭಾಗವಹಿಸಲು ಅವಕಾಶ ಮಾಡಿಕೊಡಲಾಗುವುದು. ಅಲ್ಲಿಯೂ ನೀವು ಮಾಹಿತಿ ನೀಡಬೇಕು ಎಂದು ತಿಳಿಸಿದರು.

