postviews: 15
ಬೆಂಗಳೂರು: ಬಿಜೆಪಿ ಮತ್ತು ಸಂಘಪರಿವಾರದ ವಿರುದ್ಧ ನಿರಂತರ ಧ್ವನಿಯೆತ್ತುತ್ತಿರುವ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿಯವರ ಎದೆಗೆ ಗುಂಡು ಹೊಡೆಯುತ್ತೇವೆ, ಹುಷಾರ್..!! ಎಂದು ಬಿಜೆಪಿ ವಕ್ತಾರರೊಬ್ಬರು ಬಹಿರಂಗವಾಗಿ ಜೀವ ಬೆದರಿಕೆ ಒಡ್ಡಿರುವ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು ನೋಡಿದರೆ ಹೇಳಿಕೆಯ ಬಗ್ಗೆ ಅವರಿಗೂ ಸಮ್ಮತಿ ಇದೆಯೇ ಎಂಬ ಪ್ರಶ್ನೆ ಸಹಜವಾಗಿ ಎಲ್ಲರಲ್ಲೂ ಮೂಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಈ ಕುರಿತು ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಅನ್ನು ಹಾಕಿರುವ ಅವರು, ಬೆದರಿಕೆ ಒಡ್ಡಿ ಸೈದ್ಧಾಂತಿಕ ವಿರೋಧಿಗಳ ಧ್ವನಿ ಅಡಗಿಸುವುದು, ಅದಕ್ಕೂ ಬಗ್ಗದಿದ್ದಾಗ ಅವರನ್ನೇ ಇಲ್ಲವಾಗಿಸುವುದು ಬಿಜೆಪಿ ಮತ್ತು ಸಂಘಪರಿವಾರಕ್ಕೆ ಹೊಸದೇನಲ್ಲ. ಮೊದಲೆಲ್ಲ ತೆರೆಮರೆಯಲ್ಲಿ ನಿಂತು ತಮ್ಮ ವಿರೋಧಿಗಳ ಹತ್ಯೆಗಳಿಗೆ ಬೆಂಬಲ ನೀಡುತ್ತಾ ಬಂದವರು, ಈಗ ನೇರಾ ನೇರವಾಗಿ ಅಖಾಡಕ್ಕೆ ಇಳಿದಿದ್ದಾರೆ. ಎದುರಾಳಿಗಳನ್ನು ಸಂವಾದ, ಚರ್ಚೆಗಳ ಮೂಲಕ ಸೈದ್ಧಾಂತಿಕವಾಗಿ ಎದುರಿಸಲಾಗದವರು ದೈಹಿಕವಾಗಿ ಮುಗಿಸಲು ಹೊರಟಿರುವುದು ಅವರ ಬೌದ್ಧಿಕ ದಿವಾಳಿತನವನ್ನು ತೋರಿಸುತ್ತದೆ.
ಸಂಘಪರಿವಾರದ ದುರುಳರಿಂದ ಪ್ರಾಣ ಕಳೆದುಕೊಂಡವರು ಒಬ್ಬರಾ? ಇಬ್ಬರಾ? ಮಹಾತ್ಮ ಗಾಂಧಿಯವರಿಂದ ಆರಂಭಗೊಂಡ ಈ ಹತ್ಯಾ ಸರಣಿ ಗೋವಿಂದ ಪನ್ಸಾರೆ, ನರೇಂದ್ರ ದಾಬೋಲ್ಕರ್, ಎಂ.ಎಂ.ಕಲಬುರ್ಗಿ, ಗೌರಿ ಲಂಕೇಶ್ ಹೀಗೆ ಪಟ್ಟಿ ಬೆಳೆಯುತ್ತಾ ಹೋಗುತ್ತದೆ. ಇವರೆಲ್ಲರ ಕೊಲೆಗಾರರಿಗೂ ತಮಗೂ ಸಂಬಂಧವಿಲ್ಲವೆಂದು ಹೇಳಿ ಸಂಘಪರಿವಾರದ ನಾಯಕರು ಸುಲಭದಲ್ಲಿ ತಲೆತೊಳೆದುಕೊಂಡರೂ, ಅವರ ಕೈಗಳಿಗಂಟಿದ ರಕ್ತದ ಕಲೆಗಳನ್ನು ತೊಳೆಯಲಾಗಲಿಲ್ಲ. ಇದನ್ನೂ ಓದಿ: ಬಿಜೆಪಿ ಸಮಾಜದಲ್ಲಿ ಅಸಮಾನತೆ ಬಯಸುತ್ತದೆ: ಸಿಎಂ
ಈ ಹಿಂದೆ ನನಗೆ ಮಾತ್ರವಲ್ಲ ನಾಡಿನ ಅನೇಕ ಸಾಹಿತಿಗಳು, ಚಿಂತಕರು ಮತ್ತು ಹೋರಾಟಗಾರರಿಗೂ ಕೊಲೆ ಬೆದರಿಕೆ ಒಡ್ಡಿ ಪತ್ರಗಳನ್ನು ಬರೆಯಲಾಗಿದೆ. ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಇಂತಹ ಬೆದರಿಕೆಗಳಿಗೆ ಹೆದರಿ ನಂಬಿದ ಸಿದ್ಧಾಂತಕ್ಕೆ ಬೆನ್ನು ಹಾಕುವ ಜಾಯಮಾನ ನನ್ನದಲ್ಲ. ಒಂದಲ್ಲಾ ಒಂದು ದಿನ ನ್ಯಾಯದ ಎದುರು ಈ ಎಲ್ಲಾ ದುಷ್ಟರು ಮಂಡಿಯೂರುತ್ತಾರೆಂಬ ಭರವಸೆ ನನಗಿದೆ.
ರಾಹುಲ್ ಗಾಂಧಿಯವರ ಕುಟುಂಬಕ್ಕೆ ಪ್ರಾಣ ಬೆದರಿಕೆ ಇದು ಮೊದಲಲ್ಲ. ಇಂತಹ ಕೊಲೆಗಡುಕರಿಂದಲೇ ರಾಹುಲ್ ಅವರು ತಮ್ಮ ಅಜ್ಜಿ ಮತ್ತು ಅಪ್ಪನನ್ನು ಕಳೆದುಕೊಂಡವರು. ರಾಹುಲ್ ಗಾಂಧಿ ಈಗ ಒಬ್ಬಂಟಿ ಅಲ್ಲ, ಅವರ ಬೆಂಬಲಕ್ಕೆ ಕೋಟ್ಯಂತರ ಸಂಖ್ಯೆಯ ಕಾರ್ಯಕರ್ತರಿದ್ದಾರೆ ಎನ್ನುವುದು ಬಿಜೆಪಿಯ ಕೊಲೆಗಡುಕ ಮನಸ್ಸುಗಳಿಗೆ ತಿಳಿದಿರಲಿ.

