ಹಾವೇರಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರದ ಜಿಎಸ್ ಟಿ ಪರಿಹಾರದ ವಿಚಾರದಲ್ಲಿ ಒಂದು ಸುಳ್ಳನ್ನು ನೂರು ಸಲ ಹೇಳಿ ಸತ್ಯ ಮಾಡಲು ಹೊರಟಿದ್ದಾರೆ. ಮನಸ್ಸಿನಲ್ಲಿ ಮಂಡಿಗಿ ತಿಂದರೆ ಲೆಕ್ಕ ಕೊಡುವವರು ಯಾರು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಪ್ರಶ್ನಿಸಿದ್ದಾರೆ.
ಹಾವೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 11 ಸಾವಿರ ಕೋಟಿ ಅಂತ ಹೇಳುತ್ತಾರೆ. ಯಾವ ಲೆಕ್ಕ ಇದೆ. ಹಲವಾರು ಬಾರಿ ಹೇಳಿದ್ದೆವೆ. 15ನೇ ಹಣಕಾಸಿನಲ್ಲಿ 2014 ರಿಂದ 1 ಲಕ್ಷ ಕೋಟಿ ಹೆಚ್ಚು ಮೊತ್ತ ರಾಜ್ಯಕ್ಕೆ ಬರುತ್ತಿದೆ. ಪ್ರತಿ ವರ್ಷ ವರ್ಷಾಂತ್ಯದಲ್ಲಿ3000 ಕೋಟಿ ರೂ. ಬರುತ್ತಿದೆ. ಕೇಂದ್ರದಿಂದ ಬಂದಿದ್ದನ್ನು ಸಿದ್ದರಾಮಯ್ಯ ಹೇಳುವುದಿಲ್ಲ ಎಂದು ಆರೋಪಿಸಿದರು.
ಈ ದೇಶದಲ್ಲಿ ಅರಾಜಕತೆ, ಹಿಂಸೆ ಮಾಡಬೇಕು ಅನ್ನುವುದು ಒಂದು ವರ್ಗದ ಹುನ್ನಾರ. ಅದಕ್ಕೆ ಕೆಲವು ಶಕ್ತಿಗಳು ಬೆಂಬಲ ನೀಡುತ್ತಿದ್ದಾರೆ. ಉತ್ತರಪ್ರದೇಶದ ರಾಜ್ಯದಲ್ಲಿ ಇತ್ತು. ದಾವಣಗೆರೆ ಘಟನೆ ನಡೆದ ನಂತರ ಕರ್ನಾಟಕದಲ್ಲಿ ನಿಯಂತ್ರಣ ಮಾಡಬೇಕು ಅನ್ನುವ ಆಗ್ರಹ ಮಾಡಿದ್ದೇವು, ನಿಯಂತ್ರಣ ಮಾಡುತ್ತೇವೆ ಅಂದಿದ್ದರು. ಹೆಚ್ಚಿನ ಜಾಗೃತಿ ತೆಗೆದುಕೊಳ್ಳುವಲ್ಲಿ ಪೊಲೀಸರು ವಿಫಲವಾಗಿದ್ದಾರೆ. ಮಂಡ್ಯ, ಮದ್ದೂರು ಘಟನೆ ನೋಡಿದಾಗ ರಾಜ್ಯದಲ್ಲಿ ಸಂಪೂರ್ಣ ಕಾನೂನು ಸುವ್ಯವಸ್ಥಿತ ಕುಸಿದಿದೆ.
ಕಾನೂನು ಭಯ, ಪೊಲೀಸರ ಭಯ ಜನರಲ್ಲಿ ಇಲ್ಲ. ಸರ್ಕಾರ ಹಲವು ಪ್ರಕರಣಗಳನ್ನ ನಿಭಾಯಿಸುವಲ್ಲಿ ವಿಫಲಗೊಂಡಿದೆ. ಗೃಹ ಸಚಿವರು ಈ ಘಟನೆಯನ್ನು ಗಂಭೀರವಾಗಿ ತೆಗೆದುಕೊಳ್ಳಬೇಕು. ಇಲ್ಲದಿದ್ದರೆ ಜಾತಿ, ಧರ್ಮ,ಮತ ಪಂಥ ಹೆಸರಿನಲ್ಲಿ ದೇಶ ಒಡೆಯಲು ಅವಕಾಶ ಮಾಡಿಕೊಟ್ಟಂತೆ ಆಗುತ್ತದೆ ಎಂದು ಹೇಳಿದರು.
ಕಳೆದ ಬಾರಿ ಮಳೆಹಾನಿ ಪರಿಹಾರ ಕೊಡುವುದಕ್ಕೆ, ಕೇಂದ್ರ ಸರ್ಕಾರ ಹಣ ಬಿಡುಗಡೆ ಮಾಡಿದ ನಂತರ ಹಣ ನೀಡಿದ್ದಾರೆ. ಈ ಬಾರಿ ಬೆಳೆಹಾನಿ ಘೋಷಣೆ ಮಾಡಿದ್ದಾರೆ. ಇನ್ನೂ ನೀಡಿಲ್ಲ. ನಾನು ಸಿ.ಎಂ ಇದ್ದಾಗ ಎರಡುಪಟ್ಟು ಹೆಚ್ಚು ಬೆಳೆಹಾನಿ ನೀಡಿದ್ದೆ. ಕೇಂದ್ರದ ಹಣವನ್ನ ಕಾಯಲಿಲ್ಲ. ಇವರಿಗೆ ರೈತರ ಬಗ್ಗೆ ನಿಜವಾದ ಕಾಳಜಿ ಇದ್ದರೆ, ಕೂಡಲೇ ಬಿಡುಗಡೆ ಮಾಡಬೇಕು. ಕೇಂದ್ರದ ಬಗ್ಗೆ ನೆಪ ಹೇಳಬಾರದು ಎಂದು ಆಗ್ರಹಿಸಿದರು. ಇದನ್ನೂ ಓದಿ: ಪ್ರತೀ ಜಿಲ್ಲೆಗೆ ಒಂದು ಸರ್ಕಾರಿ ಮೆಡಿಕಲ್ ಕಾಲೇಜು: ಸಿಎಂ
ಸಿದ್ದರಾಮಯ್ಯ ಇನ್ನೂ ಎರಡುವರೆ ವರ್ಷ ಮುಖ್ಯಮಂತ್ರಿ ಆಗಲೀ ಯಾರು ಬೇಡ ಅಂದವರು, ಮುಖ್ಯಮಂತ್ರಿ ಆಗಿರುತ್ತಾರೋ ಇಲ್ಲವೋ ಅನ್ನೋದು ಕಾಂಗ್ರೆಸ್ ಉತ್ತರ ಕೊಡಬೇಕು. ಮುಖ್ಯಮಂತ್ರಿಯಾಗಿ ರಾಜ್ಯವನ್ನು ಅದೋಗತಿಗೆ ತೆಗೆದುಕೊಂಡು ಹೋಗಿದ್ದಕ್ಕೆ ಯಾರು ಜವಾಬ್ದಾರರು. ರಾಜ್ಯ ದಿವಾಳಿ ಆಗಿದೆ. ಯಾವುದೇ ಅಭಿವೃದ್ಧಿ ಕಾರ್ಯ ಆಗಿಲ್ಲ. ಶಾಸಕರಿಂದ ಲಿಸ್ಟ್ ಕೇಳಿದ್ದಾರೆ. ಲಿಸ್ಟ್ ಕೊಟ್ಟರೆ ಅಭಿವೃದ್ದಿ ಕೆಲಸ ಆಗಲ್ಲ. ಗುತ್ತಿಗೆದಾರರು ಮತ್ತೆ ಕಮಿಷನ್ ಎರಡುಪಟ್ಟು ಆಗಿದೆ ಎಂದು ಆರೋಪಿಸಿದ್ದಾರೆ. ಇದಕ್ಕೆ ತಕ್ಕ ಉತ್ತರ ಕೊಡಲಿ. ಭ್ರಷ್ಟಾಚಾರ ರಹಿತ ಅಭಿವೃದ್ಧಿ ಮಾಡಲಿ, ಆ ಮೇಲೆ ಅವರು ಎರಡು ವರ್ಷ ಇರುತ್ತಾರೋ, 3 ವರ್ಷ ಇರುತ್ತಾರೋ ನೋಡೋಣ ಎಂದು ಹೇಳಿದರು.

